ಪದ್ಯ ೫೮: ಭಾರಧ್ವಾಜರು ದ್ರೋಣರಿಗೆ ಏನನ್ನು ಉಪದೇಶಿಸಿದರು?

ಆದುದವಿವೇಕದಲಿ ಸತ್ಪಥ
ವೈದಿಕಾತಿಕ್ರಮಣವಿನ್ನು ಗ
ತೋದಕದಲುರೆ ಸೇತುಸಂಬಂಧದಲಿ ಫಲವೇನು
ಈ ದುರಾಗ್ರಹ ನಿಲಲಿ ಹಾಯಿಕು
ಕೈದುವನು ಸುಸಮಾಧಿ ಯೋಗದ
ಲೈದು ನಿಜವನು ದೇಹ ನಿಸ್ಪೃಹನಾಗು ನೀನೆಂದ (ದ್ರೋಣ ಪರ್ವ, ೧೮ ಸಂಧಿ, ೫೮ ಪದ್ಯ)

ತಾತ್ಪರ್ಯ:
ಅವಿವೇಕದಿಂದ ವೇದವು ವಿಧಿಸಿರುವ ಸನ್ಮಾರ್ಗವನ್ನು ಮೀರಿ ನಡೆದಿರುವೆ, ನೀರೆಲ್ಲಾ ಹರಿದು ಹೋದ ಮೇಲೆ ಕಟ್ಟೆಯನ್ನು ಕಟ್ಟಿದರೇನು ಫಲ. ಇದುವರೆಗೆ ಆದದ್ದೆಲ್ಲಾ ಆಯಿತು, ಇನ್ನಾದರೂ ಈ ದುರಾಗ್ರಹವನ್ನು ಬಿಡು, ಆಯುಧಗಳನ್ನೆಸೆದು, ಸಮಾಧಿಯೋಗದಿಮ್ದ ನಿನ್ನ ನಿಜವನ್ನು ನೀನು ಸಾಧಿಸು, ದೇಹವನ್ನು ಬಯಸಬೇಡ ಎಂದು ಭಾರಧ್ವಾಜರು ಉಪದೇಶಿಸಿದರು.

ಅರ್ಥ:
ಅವಿವೇಕ: ಯುಕ್ತಾಯುಕ್ತ ವಿಚಾರವಿಲ್ಲದ; ಪಥ: ಮಾರ್ಗ; ವೈದಿಕ: ವೇದಗಳನ್ನು ಬಲ್ಲವನು; ಅತಿಕ್ರಮಣ: ಕ್ರಮವನ್ನು ಉಲ್ಲಂಘಿಸುವುದು; ಗತ: ಕಳೆದ, ಆಗಿ ಹೋದ; ಉದಕ: ನೀರು; ಉರೆ: ಅತಿಶಯವಾಗಿ; ಸೇತು: ಸೇತುವೆ, ಸಂಕ; ಸಂಬಂಧ: ಸಂಪರ್ಕ, ಸಹವಾಸ; ಫಲ: ಪ್ರಯೋಜನ; ದುರಾಗ್ರಹ: ಹಟಮಾರಿತನ; ನಿಲಲಿ: ನಿಲ್ಲು, ತಡೆ; ಹಾಯಿಕು: ಕಳಚು, ತೆಗೆ; ಕೈದು: ಆಯುಧ; ಸಮಾಧಿ: ಏಕಾಗ್ರತೆ, ತನ್ಮಯತೆ; ಯೋಗ: ರೀತಿ, ವಿಧಾನ; ನಿಜ: ದಿಟ; ದೇಹ: ಶರೀರ; ನಿಸ್ಪೃಹ: ಆಸೆ ಇಲ್ಲದವ;

ಪದವಿಂಗಡಣೆ:
ಆದುದ್+ಅವಿವೇಕದಲಿ +ಸತ್ಪಥ
ವೈದಿಕ+ಅತಿಕ್ರಮಣವ್+ಇನ್ನು +ಗತ
ಉದಕದಲ್+ಉರೆ +ಸೇತು+ಸಂಬಂಧದಲಿ +ಫಲವೇನು
ಈ +ದುರಾಗ್ರಹ +ನಿಲಲಿ +ಹಾಯಿಕು
ಕೈದುವನು +ಸುಸಮಾಧಿ +ಯೋಗದಲ್
ಐದು +ನಿಜವನು +ದೇಹ +ನಿಸ್ಪೃಹನಾಗು +ನೀನೆಂದ

ಅಚ್ಚರಿ:
(೧) ಉಪಮಾನದ ಪ್ರಯೋಗ – ಗತೋದಕದಲುರೆ ಸೇತುಸಂಬಂಧದಲಿ ಫಲವೇನು