ಪದ್ಯ ೧೪: ಸೈನಿಕರ ನಡುವೆ ಯುದ್ಧವು ಹೇಗೆ ಮುಂದುವರೆಯಿತು?

ಕೇಣವಿಲ್ಲದೆ ಭಟರ ಹಾಣಾ
ಹಾಣಿ ಮಸಗಿತು ಖಣಿಖಟಿಲ ಹೊ
ಯ್ದಾಣೆಗಳ ಬಿರುಗಿಡಿಯ ಹಿರಿಯುಬ್ಬಣದ ಹೊಯ್ಲುಗಳ
ಹೂಣಿಕೆಯ ಸಬಳಿಗರೊಳಿಮ್ಮೈ
ಗಾಣಿಕೆಯ ಬಲುಸೂತರಥಿಕರ
ಜಾಣತಿಯ ಬಿಲ್ಲವರ ಧಾಳಾಧೂಳಿ ಬಲುಹಾಯ್ತು (ಶಲ್ಯ ಪರ್ವ, ೨ ಸಂಧಿ, ೧೪ ಪದ್ಯ)

ತಾತ್ಪರ್ಯ:
ಭಟರೆಲ್ಲರೂ ಸಂಕೋಚವನ್ನು ಬಿಟ್ಟು ಶಕ್ತಿಮೀರಿ ಹಾಣಾಹಾಣಿ ಯುದ್ಧದಲ್ಲಿ ತೊಡಗಿದರು. ಆಯುಧಗಳು ತಾಕಿ ಖಣಿಖಟಿಲು ಸದ್ದು ಕೇಳಿ ಕಿಡಿಗಳುರುಳಿದವು. ಉಬ್ಬಣಗಳು ತಾಕಲಾಡಿದವು. ಭಲ್ಯ ಈಟಿಗಳಿಂದ ವೈರಿಗಳನ್ನು ಹಣಿದರು. ಬಿಲ್ಲಾಳುಗಳು, ಸೂತರು, ರಥಿಕರು ಸಮರೋದ್ಯೋಗದಲ್ಲಿ ನಿರತರಾದರು.

ಅರ್ಥ:
ಕೇಣ: ಹೊಟ್ಟೆಕಿಚ್ಚು; ಭಟ: ಸೈನಿಕ; ಹಾಣಾಹಾಣಿ: ಹಣೆ ಹಣೆಯ ಯುದ್ಧ; ಮಸಗು: ಹರಡು; ಕೆರಳು; ಖಣಿಖಟಿಲು: ಬಾಣದ ಶಬ್ದವನ್ನು ವಿವರಿಸುವ ಪದ; ಹೋಯ್ದ್: ಹೊಡೆ; ಬಿರು: ಬಿರುಸಾದುದು, ಗಟ್ಟಿಯಾದ;
ಕಿಡಿ: ಬೆಂಕಿ; ಹಿರಿ: ಹೆಚ್ಚು; ಉಬ್ಬಣ: ಚೂಪಾದ ಆಯುಧ; ಹೊಯ್ಲು: ಏಟು, ಹೊಡೆತ; ಹೂಣಿಕೆ: ಶಪಥ, ಪ್ರತಿಜ್ಞೆ; ಸಬಳ: ಈಟಿ, ಭರ್ಜಿ; ಸೂತ: ಸಾರಥಿ; ರಥಿಕ: ರಥದ ಮೇಲೆ ಕುಳಿತು ಯುದ್ಧ ಮಾಡುವವ; ಜಾಣತಿ: ಜಾನತನ; ಬಿಲ್ಲವರ: ಬಿಲ್ಲುಗಾರ; ಧಾಳಾಧೂಳಿ: ವಿಪ್ಲವ, ಚೆಲ್ಲಾಪಿಲ್ಲಿ; ಬಲುಹು: ಬಲ, ಶಕ್ತಿ;

ಪದವಿಂಗಡಣೆ:
ಕೇಣವಿಲ್ಲದೆ +ಭಟರ +ಹಾಣಾ
ಹಾಣಿ +ಮಸಗಿತು +ಖಣಿಖಟಿಲ+ ಹೊ
ಯ್ದಾಣೆಗಳ+ ಬಿರು+ಕಿಡಿಯ +ಹಿರಿ+ಉಬ್ಬಣದ+ ಹೊಯ್ಲುಗಳ
ಹೂಣಿಕೆಯ +ಸಬಳಿಗರೊಳ್+ಇಮ್ಮೈ
ಗಾಣಿಕೆಯ +ಬಲು+ಸೂತ+ರಥಿಕರ
ಜಾಣತಿಯ +ಬಿಲ್ಲವರ+ ಧಾಳಾಧೂಳಿ +ಬಲುಹಾಯ್ತು

ಅಚ್ಚರಿ:
(೧) ಹಾಣಾಹಾಣಿ, ಖಣಿಖಟಿಲ, ಧಾಳಾಧೂಳಿ – ಪದಗಳ ಬಳಕೆ